ಅದ್ಯಾಯ 15

ದೇವರ ಕಡೆಗೆ ತಿರುಗಿದ ಪಾಪಿಯ ವಿಷಯದಲ್ಲಿ ಪರಲೋಕದಲ್ಲಿ ಆಗುವ ಸಂತೋಷವನ್ನು ಸೂಚಿಸುವ ಮೂರು ದೃಷ್ಟಾಂತಗಳು 1 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಾ ಇರಲು 2 ಫರಿಸಾಯರೂ ಶಾಸ್ತ್ರಿಗಳೂ - <<ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ>> ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. 3 ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 4 ಅದೇನಂದರೆ - <<ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? 5 ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು 6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - <ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಅವರಿಗೆ ಹೇಳುವನಲ್ಲವೇ. 7 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ. 8 <<ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದು ಹೋದರೆ ದೀಪಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? 9 ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು - <ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಹೇಳುವಳಲ್ಲವೇ. 10 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ>> ಅಂದನು. 11 ಇನ್ನೂ ಆತನು ಹೇಳಿದ್ದೇನಂದರೆ - <<ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. 12 ಅವರಲ್ಲಿ ಕಿರಿಯವನು ತಂದೆಗೆ - <ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು> ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು 13 ಸ್ವಲ್ಪ ದಿವಸದ ಮೇಲೆ ಆ ಕಿರಿಯಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. 14 ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು. 15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. 16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ. 17 ಆಗ ಅವನಿಗೆ ಬುದ್ಧಿಬಂದು ಅವನು - <ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ; 19 ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು> ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು. 20 ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು. 21 ಆದರೂ ಮಗನು ಅವನಿಗೆ - <ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿ ಕೊಳ್ಳುವುದಕ್ಕೆ ಯೋಗ್ಯನಲ್ಲ> ಎಂದು ಹೇಳಲು 22 ತಂದೆಯು ತನ್ನ ಆಳುಗಳಿಗೆ - <ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ; ಇವನ ಕೈಗೆ ಉಂಗುರವನ್ನು ಹಾಕಿರಿ; ಕಾಲಿಗೆ ಜೋಡು ಹಾಕಿರಿ; 23 ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಉಲ್ಲಾಸಪಡೋಣ. 24 ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು> ಎಂದು ಹೇಳಿ ಸಂತೋಷಿಸುವುದಕ್ಕೂ ಉಲ್ಲಾಸಪಡುವುದಕ್ಕೂ ತೊಡಗಿದರು. 25 ಆದರೆ ಅವನ ಹಿರೀಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ 26 ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು - ಇದೇನು ಎಂದು ವಿಚಾರಿಸಿದನು. 27 ಆಳು ಅವನಿಗೆ - <ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ> ಎಂದು ಹೇಳಿದನು. 28 ಇದನ್ನು ಕೇಳಿ ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. 29 ಆದರೆ ಅವನು ತನ್ನ ತಂದೆಗೆ - <ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. 30 ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ> ಎಂದು ಉತ್ತರಕೊಟ್ಟನು. 31 31ಅದಕ್ಕೆ ತಂದೆಯು - <ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ. 32 ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ; ಯಾಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು> >> ಎಂದು ಹೇಳಿದನು.